ದೀಪವಿರದ ದಾರಿಯಲ್ಲಿ
ತಡವರಿಸುವ ನುಡಿಗಳೇ
ಕಂಬನಿಯ ತಲಾತಲದಿ
ನಂದುತಿಹ ಕಿಡಿಗಳೇ
ಉಸಿರನಿಡುವೆ
ಹೆಸರ ಕೊಡುವೆ
ಬನ್ನಿ ನನ್ನ ಹ್ರುದಯಕೆ
ನೀಲಿಯಲ್ಲಿ ಮಯ್ಯಿಲ್ಲದೆ
ತೇಲಾಡುವ ಹನಿಗಳೇ
ಬಾಯಿಲ್ಲದ ಮವ್ನದಲ್ಲಿ
ಅಲೆಯಂತಿಹ ದನಿಗಳೇ
ಉಸಿರನಿಡುವೆ
ಹೆಸರ ಕೊಡುವೆ
ಬನ್ನಿ ನನ್ನ ಹ್ರುದಯಕೆ
ಜಲವಿಲ್ಲದ ನೆಲದಲ್ಲಿ
ಕಮರುತಿರುವ ಕುಡಿಗಳೇ
ಬಿರುಬಿಸಿಲಿನ ತುಳಿತದಲಿ
ಸೊರಗಿ ಹೋದ ನುಡಿಗಳೇ
ಉಸಿರನಿಡುವೆ
ಹೆಸರ ಕೊಡುವೆ
ಬನ್ನಿ ನನ್ನ ಹ್ರುದಯಕೆ
ಶ್ರುತಿಯಿಲ್ಲದ ವಾದ್ಯದಲ್ಲಿ
ಗತಿಯಿಲ್ಲದ ಸ್ವರಗಳೇ
ಬಿರುಗಾಳಿಗೆ ಗರಿಯುದರಿದ
ಹೊಂಗನಿಸಿನ ಮರಿಗಳೇ
ಉಸಿರನಿಡುವೆ
ಹೆಸರ ಕೊಡುವೆ
ಬನ್ನಿ ನನ್ನ ಹ್ರುದಯಕೆಕಬ್ಬಿಗ/ನೆಗಳ್ಚು : ಜಿ ಎಸ್ ಶಿವರುದ್ರಪ್ಪ
ಕಬ್ಬಸಿವುಡಿ/ಕವನ ಸಂಕಲನ : ಪ್ರೀತಿ ಇಲ್ಲದ ಮೇಲೆ
ಹಾಡಿದವರು: ಸಿ. ಅಶ್ವತ್
ಬಣ, ಮತ, ದರ್ಮದ ಗುಂಗಿನಲ್ಲಿ ಹೊತ್ತಿ ಉರಿಯುವ ಇಂದಿನ ಬದುಕಿನ ಜಂಜಾಟಗಳಿಗೆ ಬೆಟ್ಟು ಮಾಡಿ ತೋರಿಸುವಂತ ಕಬ್ಬ.
ಯಾವ ಹಾಡು ಹಾಡಲಿ
ಯಾವ ಹಾಡಿನಿಂದ ನಿನಗೆ
ನೆಮ್ಮದಿಯನು ನೀಡಲಿ
ಸುತ್ತ ಮುತ್ತ ಮನೆಮಠಗಳು
ಹೊತ್ತಿಕೊಂಡು ಉರಿಯುತಿರಲು
ಸೋತು ಮೂಕವಾದ ಬದುಕು
ನಿಟ್ಟಿಸಿರೊಳು ತೇಲುವಲ್ಲಿ
ಯಾವ ಹಾಡು ಹಾಡಲಿ?
ಬರಿ ಮಾತುಗಳ ಜಾಲದಲ್ಲಿ
ಶೋಷಣೆಗಳ ಜಾಲದಲ್ಲಿ
ವಂಚನೆಗಳ ಸಂಚಿನಲ್ಲಿ
ಹಸಿದ ಹೊಟ್ಟೆ ನರಳುವಲ್ಲಿ
ಯಾವ ಹಾಡು ಹಾಡಲಿ?
ಉರಿವ ಕಣ್ಣು ಚಿತೆಯಲ್ಲಿ
ಇರುವ ಕನಸು ಸೀಯುವಲ್ಲಿ
ಎದೆ ಎದೆಗಳ ಜ್ವಾಲಾಮುಖಿ
ಹೊಗೆ ಬೆಂಕಿಯ ಕಾರುವಲ್ಲಿ
ಯಾವ ಹಾಡು ಹಾಡಲಿ?
ಬೆಳಕಿಲ್ಲದ ದಾರಿಯಲ್ಲಿ
ಪಾಳುಗುಡಿಯ ಸಾಲಿನಲ್ಲಿ
ಬಿರು ಗಾಳಿಯ ಬೀಡಿನಲ್ಲಿ
ಕುರುಡು ಪಯಣ ಸಾಗುವಲ್ಲಿ
ಯಾವ ಹಾಡು ಹಾಡಲಿ?
ಕಬ್ಬಿಗ/ನೆಗಳ್ಚು : ಜಿ ಎಸ್ ಶಿವರುದ್ರಪ್ಪ
ಕಬ್ಬಸಿವುಡಿ/ಕವನ ಸಂಕಲನ : ಪ್ರೀತಿ ಇಲ್ಲದ ಮೇಲೆ
ಈ ಬರಹ ನನಗೆ ಹಾಗೆ ಈ-ಓಲೆಯಲ್ಲಿ ಸಿಕ್ಕಿತು
ಬರಹಗಾರ : ಎ.ಆರ್. ಮಣಿಕಾಂತ್ . ಈ ಬರಹ ನನ್ನನ್ನೆದೆಯನ್ನು ಆಳವಾಗಿ ನಾಟಿತು ಅದಕ್ಕೆ ನನ್ನ ಬ್ಲಾಗ್ನಲ್ಲಿ ಸೇರಿಸೋಣ ಅಂದುಕೊಂಡೆ. ಅದಕ್ಕೆ ಇಲ್ಲಿ ಸೇರಿಸಿದೆ. ಬರೆದವರ ಒಪ್ಪಿಗೆ ಕೇಳದೇ ಇಲ್ಲಿ ಹಾಕಿರುವೆ. ಕೇಳಲು ಎಲ್ಲಿರುವರೋ ನನಗೆ ತಿಳಿಯದು. ಅವರಲ್ಲೊಂದು ಕೋರಿಗೆ ಅವರ ಬರಹ ನಾನಿಲ್ಲಿ ಹಾಕಿರುವುದು ಹಿಡಿಸದಿದ್ದರೆ ಹೇಳಿ. ನಾನು ಇಲ್ಲಿಂದ ತೆಗೆದು ಹಾಕುವೆ. ಗೆಳೆಯರೆ/ಓದಗರೇ ತುಂಬಾ ಒಳ್ಳೆಯ ಬರಹ, ತಾಯ್ತನ ತಾಯಿಯ ಮುಚ್ಚಟೆಯ ಬಗ್ಗೆ ತೋರಿಸಿರುವ ಸೊಗಸಾದ ಬರಹ. ನೀವೂ ಓದಿ ನಲಿಯಿರಿ.
ತುಂಬಾ ದೂರ ಅಲ್ಲ ಸಾರ್, ಇಲ್ಲೇ, ಬೆಂಗಳೂರು ತುಮಕೂರಿನ ಮಧ್ಯೆ ನೆಲಮಂಗಲ ಇದೆಯಲ್ಲ? ಅದಕ್ಕೆ ಅಂಟಿಕೊಂಡ ಹಾಗೇ ಇರುವ ಪುಟ್ಟ ಗ್ರಾಮ ನಮ್ದು. ಹಳ್ಳಿ ಅಂದ್ಮೇಲೆ ಅಲ್ಲಿನ ಬದುಕು ಹೇಗಿರತ್ತೆ ಅಂತ ನಿಮಗೇನೂ ವಿವರಿಸಬೇಕಿಲ್ಲ ಅಲ್ವ? ನಮಗಂತೂ ಬಡತನವೇ ಬದುಕಾಗಿತ್ತು. ಕೂಲಿ ಕೆಲಸ ಮಾಡ್ತಿದ್ದ ಅಪ್ಪನಿಗೆ ಒಂದು ನಿಶ್ಚಿತ ಆದಾಯ ಅಂತ ಇರಲೇ ಇಲ್ಲ. ಕೆಲಸಕ್ಕೆ ಕರೀತಿದ್ದ ಸಾಹುಕಾರರು ನಾಲ್ಕು ಕಾಸು ಕೊಡ್ತಿದ್ರು ನಿಜ. ಆದ್ರೆ ಅದಕ್ಕೆ ನಾಲ್ಕು ಜನರ ಕೆಲಸ ಮಾಡಿಸಿಕೊಳ್ತಿದ್ರು. ಹಗಲಿಂದ ದುಡಿದು ದುಡಿದು ಸುಸ್ತಾಗ್ತಿತ್ತು ನೋಡಿ, ಅದಕ್ಕೇ ಅಪ್ಪ ಕುಡಿತ ಕಲಿತ. ಸಂಜೆ ಮನೆಗೆ ಬಂದವನು ಅಮ್ಮನಿಗೆ ಒಂದಿಷ್ಟು ದುಡ್ಡು ಕೊಟ್ಟು, ಮಕ್ಕಳನ್ನೆಲ್ಲ ಕುಶಾಲಿನಿಂದ ಮಾತಾಡಿಸಿ, ಸೀದಾ ಹೆಂಡದಂಗಡಿಗೆ ಹೋಗಿಬಿಡುತ್ತಿದ್ದ.
ಇಂಥ ಬದುಕಿನ ಹಲಗೆಯ ಮೇಲೆ, ಸದಾ ಅಣಕಿಸುತ್ತಿದ್ದ ಕಡು ಬಡತನದ ಮಧ್ಯೆ, ಬಂಧುಗಳ ತಾತ್ಸಾರದ ನಡುವೆ, ನೆರೆಹೊರೆಯವರ ಸಣ್ಣ ಮಾತುಗಳ ನುಂಗಿ ಅಮ್ಮ ನಮ್ಮನ್ನು ಅದೆಷ್ಟು ಚೆನ್ನಾಗಿ ಬೆಳೆಸಿದಳು ಗೊತ್ತಾ ಸಾರ್? ಆದರೆ ಹಾಗೆ ಬೆಳೆಸುವ ಸಂದರ್ಭದಲ್ಲಿ ಅಮ್ಮ ಸಂದರ್ಭಕ್ಕೆ ತಕ್ಕ ಹಾಗೆ ಸುಳ್ಳು ಹೇಳಿಕೊಂಡೇ ಬಂದಳು. ಆ ಸುಳ್ಳುಗಳ ಹಿಂದೆ ಸಂಕಟವಿತ್ತು. ಹಸಿವಿತ್ತು. ಕಣ್ಣೀರಿತ್ತು. ನಿಟ್ಟುಸಿರಿತ್ತು. ಈ ಬದುಕಿನ ಬಗ್ಗೆ ಬಡತನದ ಬಗ್ಗೆ; ಸಿಡಿಮಿಡಿಯಿತ್ತು. ಏನೂ ಮಾಡಲಾಗದ ತನ್ನ ಅಸಹಾಯಕತೆಯ ಬಗ್ಗೆ ವಿಷಾದವಿತ್ತು. ಮಕ್ಕಳು ಚೆನ್ನಾಗಿರಲಿ ಎಂಬ ಒಂದೇ ಕಾರಣಕ್ಕಾಗಿ ಅಮ್ಮ ಮೇಲಿಂದ ಮೇಲೆ ಒಂದೊಂದೇ ಸುಳ್ಳು ಹೇಳ್ತಿದ್ಲು. ಅದೆಲ್ಲ ಸುಳ್ಳು ಅಂತ ನಮಗೆ ಗೊತ್ತಾಗುವ ವೇಳೆಗೆ ತುಂಬ ತಡವಾಗಿತ್ತು. ಈಗ, ಅಮ್ಮ ಹೇಳಿದ್ದ ಸುಳ್ಳುಗಳನ್ನೆಲ್ಲ ಸಂದರ್ಭ ಸಹಿತ ನಿಮ್ಮೊಂದಿಗೆ ಹಂಚ್ಕೋಬೇಕು ಅನ್ನಿಸ್ತಿದೆ ಸಾರ್.
****ನಾನು ಆಗಷ್ಟೇ ಒಂದನೇ ತರಗತಿಗೆ ಸೇರಿದ್ದೆ. ಯಥಾಪ್ರಕಾರ ಮನೇಲಿ ಮಧಾಹ್ನದ ಬಡತನವಿತ್ತು. ಆದರೆ ಅದು ನಮಗೆ ಗೊತ್ತೇ ಆಗದಂತೆ ಅಮ್ಮ ಎಚ್ಚರ ವಹಿಸಿದ್ದಳು. ಬೆಳಗ್ಗೆ ಹೊತ್ತು ತಿಂಡಿ ತಿಂದು ನಮಗೆ ಅಭ್ಯಾಸವೇ ಇರಲಿಲ್ಲ. ಬೆಳಗ್ಗೆ ಬೆಳಗ್ಗೇನೇ ಅಮ್ಮ ಅಕ್ಕಿಯದೋ, ರಾಗೀದೋ ಗಂಜಿ ಮಾಡ್ತಿದ್ದಳು. ಅಪ್ಪ ಲಗುಬಗೆಯಿಂದ ಗಂಜಿ ಕುಡಿದು ಹೋದ ಮೇಲೆ ಉಳಿದಿದ್ದರಲ್ಲಿ ನಾನು ಅಮ್ಮ ಪಾಲು ಮಾಡ್ಕೋತಾ ಇದ್ವಿ. ತುಂಬಾ ಸಂದರ್ಭಗಳಲ್ಲಿ ಏನಾಗ್ತಾ ಇತ್ತು ಅಂದ್ರೆ, ಅಮ್ಮ ತಟ್ಟೆಗೆ ಗಂಜಿ ಹಾಕಿದ ತಕ್ಷಣ ನಾನು ಗಟಗಟನೆ ಕುಡಿದುಬಿಡ್ತಿದ್ದೆ. ಎರಡೇ ನಿಮಿಷದಲ್ಲಿ ನನ್ನ ತಟ್ಟೆ ಖಾಲಿಯಾದದ್ದು ಕಂಡು ಅಮ್ಮ, ಒಮ್ಮೆ ಮೆಲ್ಲನೆ ನಕ್ಕು ತನ್ನ ತಟ್ಟೇಲಿ ಇದ್ದುದನ್ನೂ ನನಗೇ ಕೊಡ್ತಿದ್ಲು.
*ಬಡವರಿಗೆ ಭಯ ಭಕ್ತಿ ಜಾಸ್ತಿ ಅಂತಾರೆ. ನಮ್ಮ ಮಟ್ಟಿಗೂ ಈ ಮಾತು ನಿಜವಾಗಿತ್ತು. ಅದೇ ಕಾರಣದಿಂದ ಹಬ್ಬ ಹರಿದಿನಗಳೂ ಜಾಸ್ತಿ ಇದ್ದವು. ಪ್ರತಿ ಹಬ್ಬಕ್ಕೂ ಬೆಲ್ಲದ ಪಾಯಸವೇ ಸ್ಪೆಷಲ್ಲು! ಆಗಲೂ ಅಷ್ಟೇ ಸಾರ್. ಅಮ್ಮ ಒಂದು ಪಾತ್ರೇಲಿ ಪಾಯಸ ಮಾಡಿರ್ತಾ ಇದ್ದಳು. ಹಬ್ಬದ ದಿನ ಮಾತ್ರ ಗಂಜಿಯ ಬದಲಿಗೆ ಅನ್ನ ಮಾಡಿರ್ತಾ ಇದ್ಳು. ನಾನು ಆಸೆಯಿಂದ ತಟ್ಟೆ ತುಂಬಾ ಅನ್ನ ಹಾಕಿಸ್ಕೊಂಡು ಗಬಗಬಾಂತ ತಿಂದು ಮುಗಿಸ್ತಿದ್ದೆ. ಆಮೇಲೆ ಒಂದು ರೌಂಡ್ ಪಾಯಸ ಕುಡಿದು, ಮತ್ತೆ ಆ ಪಾತ್ರೆಯ ಕಡೆಗೇ ಆಸೆಯಿಂದ ನೋಡ್ತಿದ್ದೆ ನೋಡಿ, ಆಗಲೇ ಅಮ್ಮ ಅಷ್ಟೂ ಪಾಯಸವನ್ನು ನಂಗೆ ಕೊಟ್ಟು ‘ಕಂದಾ, ಎಲ್ಲವನ್ನೂ ಕುಡ್ಕೋ. ನನಗೆ ವಿಪರೀತ ಹಲ್ಲು ನೋವು ಕಣಪ್ಪಾ. ಜತೆಗೆ ಸಿಹಿ ಅಂದ್ರೆ ನಂಗೆ ಇಷ್ಟವಿಲ್ಲ' ಅಂದುಬಿಡುತ್ತಿದ್ದಳು. ನಂತರ ಸರಸರನೆ ಅಡುಗೆ ಮನೆಗೆ ಹೋಗಿ, ಒಂದು ಚೊಂಬಿನ ತುಂಬಾ ನೀರು ಕುಡಿದು- ‘ಹೌದಪ್ಪಾ, ನನಗೆ ಸಿಹಿ ಇಷ್ಟವಿಲ್ಲ' ಅಂತಿದ್ಲು. ಅದು ಅಮ್ಮ ಹೇಳಿದ ಎರಡನೇ ಸುಳ್ಳು!
*ಆಗಷ್ಟೇ ನಾನು ಐದನೇ ತರಗತಿಗೆ ಬಂದಿದ್ದೆ. ಸ್ಕೂಲಿಂದ ಟೂರ್ ಹೊರಟಿದ್ರು. ಒಬ್ಬರಿಗೆ 300 ರೂ. ಶುಲ್ಕ. ಎಲ್ಲ ವಿಷಯ ಹೇಳಿ ‘ಅಪ್ಪಾ, ಕಾಸು ಕೊಡಪ್ಪಾ' ಅಂದೆ. ‘ಮಗಾ, ಇಡೀ ವರ್ಷ ದುಡಿದ್ರೂ ನನಗೆ ಅಷ್ಟು ದುಡ್ಡು ಸಿಗಲ್ಲ. ಬಡವಾ ನೀ ಮಡಗಿದಂಗಿರು ಅಂದಿದಾರೆ ದೊಡ್ಡವರು. ಹಾಗೇ ಇರು. ಟೂರೂ ಬೇಡ, ಗೀರೂ ಬೇಡ' ಅಂದೇಬಿಟ್ಟ ಅಪ್ಪ. ಅವತ್ತಿಂದಲೇ ಹಗಲಿಡೀ ಕೆಲಸ ಮುಗಿಸಿ, ರಾತ್ರಿ ಅದೆಷ್ಟೋ ಹೊತ್ತಿನವರೆಗೂ ಬೀಡಿ ಕಟ್ತಾ ಇರ್ತಿದ್ಲು ಅಮ್ಮ. ಯಾಕಮ್ಮಾ ಹೀಗೆ ಅಂದ್ರೆ ‘ನಂಗೆ ರಾತ್ರಿ ಹೊತ್ತು ನಿದ್ರೇನೇ ಬರ್ತಿಲ್ಲ ಮಗನೇ' ಅಂದು ಕೆಲಸ ಮುಂದುವರಿಸ್ತಾ ಇದ್ಳು. ಕಡೆಗೊಂದು ದಿನ ಮುದುರಿ ಮುದುರಿ ಮುದುರಿಕೊಂಡಿದ್ದ ನೋಟುಗಳನ್ನೆಲ್ಲ ಕೊಟ್ಟು "ಟೂರ್ಗೆ ಹೋಗಿದ್ದು ಬಾಪ್ಪ" ಅಂದಳು. ಅದು ಸಾಲ ಮಾಡಿದ ಹಣ ಎದು ನನಗೆ ಗೊತ್ತಾಗುವ ವೇಳೆಗೆ ಅಮ್ಮ ಮತ್ತೆ ಬೀಡಿ ಕಟ್ಟಳು ಕುಳಿತಾಗಿತ್ತು. ಹಿಂದೆಯೇ ‘ಅಯ್ಯೋ ನಂಗೆ ನಿದ್ರೇನೇ ಬರ್ತಿಲ್ಲ' ಎಂಬ ಅದೇ ಹಳೆಯ ಮಾತು ಬೇರೆ. ಹೌದು. ಅದು ಅಮ್ಮ ಹೇಳಿದ ಮೂರನೇ ಸುಳ್ಳು.
*ಏಳನೇ ತರಗತಿಗೆ ಬರುವ ವೇಳೆಗೆ ನನಗೆ ಸ್ಕಾಲರ್ಷಿಪ್ ಬಂತು. ಭರ್ತಿ ನೂರು ರೂಪಾಯಿ. ಅದರಲ್ಲಿ ಅಮ್ಮನಿಗೆ ಒಂದು ಹೊಸ ಸೀರೆ ತೆಗೆದುಕೊಡೋಣ ಅಂತ ಆಸೆಯಿತ್ತು. ದುಡ್ಡನ್ನು ಅಮ್ಮನಿಗೆ ಕೊಟ್ಟು, ‘ಕೆಂಪು ಕಲರ್ದು ಒಂದು ಸೀರೆ ತಗೋಮ್ಮ. ಅದರಲ್ಲಿ ನೀನು ಚೆಂದ ಕಾಣ್ತೀಯ' ಅಂದೆ.ಅಷ್ಟಕ್ಕೇ ನನ್ನನ್ನು ಬಾಚಿ ತಪ್ಪಿಕೊಂಡು ಹಣೆಗೆ ಮುತ್ತಿಟ್ಟು, ನಿಂತಲ್ಲೇ ಬಿಕ್ಕಳಿಸಿದಳು ಅಮ್ಮ. ನಂತರ, ಅವತ್ತೇ ಸಂತೆಗೆ ಹೋಗಿ ಅಪ್ಪನಿಗೂ ನನಗೂ ಹೊಸ ಬಟ್ಟೆ ತಂದಳು. ‘ನಿನಗೆ' ಅಂದಿದ್ದಕ್ಕೆ ನನಗ್ಯಾಕಪ್ಪ ಬಟ್ಟೆ? ನನಗೆ ಅಂಥ ಆಸೆಯೇನೂ ಇಲ್ಲ ಎಂದು ತೇಲಿಸಿ ಮಾತಾಡಿದಳು. ಅದು ಅಮ್ಮ ಹೇಳಿದ ನಾಲ್ಕನೇ ಸುಳ್ಳು!
*ಓದು ಮುಗಿದದ್ದೇ ತಡ, ನಂಗೆ ಕೆಲಸ ಸಿಕ್ತು. ಸಿಟಿಯಲ್ಲಿ ದೊಡ್ಡ ಮನೆ ಮಾಡಿದೆ. ಒಂದಿಷ್ಟು ದುಡ್ಡು ಮಾಡಿಕೊಂಡೆ. ಅಮ್ಮ ನನಗೋಸ್ಕರ ಪಟ್ಟ ಕಷ್ಟವೆಲ್ಲ ಗೊತ್ತಿತ್ತಲ್ಲ, ಅದೇ ಕಾರಣದಿಂದ, ಈ ಹಣವನ್ನೆಲ್ಲ ಅಮ್ಮನ ಕೈಗಿಟ್ಟು ‘ಇದೆಲ್ಲಾ ನಿನ್ನದು ಅಮ್ಮಾ. ತಗೊಂಡು ಹಾಯಾಗಿರು. ಈಗಿಂದಾನೇ ಕೆಲಸ ಮಾಡೋದು ನಿಲ್ಸು. ಈ ಗುಡಿಸಲಿನಂಥ ಮನೆ ಬಿಟ್ಟು ಬೆಂಗಳೂರಿಗೆ ಬಾ. ನನ್ನ ಜತೇಲೇ ಇದ್ದು ಬಿಡು' ಎಂದೆಲ್ಲಾ ಹೇಳಬೇಕು ಅನ್ನಿಸ್ತು. ಸಡಗರದಿಂದಲೇ ಊರಿಗೆ ಹೋದವನು ಎಲ್ಲವನ್ನೂ ಹೇಳಿದೆ. ಅಷ್ಟೂ ದುಡ್ಡನ್ನು ಅಮ್ಮನ ಮುಂದೆ ಸುರಿದೆ. ಅಮ್ಮ ಅದನ್ನು ನೋಡಲೇ ಇಲ್ಲ ಎಂಬಂತೆ, ಅಷ್ಟನ್ನೂ ತೆಗೆದು ನನ್ನ ಕೈಲಿಟ್ಟು ಹೇಳಿದಳು: ‘ಮಗಾ, ನನ್ನತ್ರ ದುಡ್ಡಿದೆ ಕಣಪ್ಪಾ. ಮಡಿಕೆ, ಕುಡಿಕೆಯಲ್ಲೆಲ್ಲ ಅಡಗಿಸಿಟ್ಟಿದೀನಿ ಕಣೋ. ಅದೆಲ್ಲ ಖರ್ಚಾದ ಮೇಲೆ ನಿನ್ನ ಹತ್ರ ಕೇಳ್ತೀನಿ. ಸದ್ಯಕ್ಕಂತೂ ನನಗೆ ದುಡ್ಡಿನ ಅಗತ್ಯಾನೇ ಇಲ್ಲ. ಅದು ಹೌದು, ಅದು ಅಮ್ಮ ಹೇಳಿದ ಆರನೇ ಸುಳ್ಳು. ನನ್ನ ನೆಚ್ಚಿನ ಹಾಡು ಇದು. ಕೇಳಿದಂತೆಲ್ಲ ಕೇಳಬೇಕೆನಿಸುತ್ತದೆ. ನನ್ನ ಹಾಗು ನನ್ನ ಕೆಲಸಗಳನ್ನು ಯಾರಾದರು ಹುಚ್ಚುತನಕ್ಕೆ ಹೋಲಿಸಿದರೆ ಆಗ ನಾನವರ ಮುಂದೆ ಈ ಹಾಡನ್ನು ಹೇಳುತ್ತೇನೆ. ( ನನ್ನ ಒಲವಿನ ಗೆಳತಿ, ಅವಳ ಮೇಲಿನ ನನ್ನ ಒಲವನ್ನು ಬಿಸಿಲಗುದುರೆಗೆ ಓಲಿಸಿದಾಗ, ಅವಳು ನಾನು ನಿನಗೆ ಸಿಗುವುದಿಲ್ಲ..! ಯಾಕೆ ನನ್ನ ಬಗ್ಗೆ ಇಟೊಂದು ಕನಸು ಕಾಣ್ತಿಯ..? ಎಂದು ಕೇಳಿದಾಗಲೆಲ್ಲ ಅವಳಿಗೆ ನಾ ಹೇಳುವ ಹಾಡು ಇದು) ನನ್ನ ತಿಳುವಳಿಕೆಯನ್ನು ನೂರಾರು ದಿಕ್ಕಿಗೆ ಕೊಂಡೊಯ್ಯುವ ಹಾಡಿದು. ನೀವು ಕೇಳಿದರೆ ನಿಮಗೂ ಚಂದ, ಇಂಪು ಅನಿಸ ಬಹುದೇನೋ. ಆಗಲೇ ನೀವು ಕೇಳಿರಬಹುದು.....! ಆದರೂ ನಿಮ್ಮಲ್ಲಿ ಹಂಚಿಕೊಳ್ಳುವ ಹಂಬಲದಿಂದ ಇದನ್ನು ಇಲ್ಲಿ ಬರೆದಿರುವೆ. ಇಂತಹ ಸೊಗಸಾದ ಹಾಡನ್ನು ಬರೆದ ಶಿವರುದ್ರಪ್ಪನರವರಿಗೆ ನನ್ನಿ.
ಹಾಗು ಇಂಪಾಗಿ ಎದೆ ತುಂಬಿ ಹಾಡಿರುವ ಅಶ್ವತ್ ರವರಿಗೂ ನನ್ನಿ. ಜೊತೆಗೆ ನಿಮ್ಮೆಲ್ಲರಿಗೂ.............!
ಕಾಣದ ಕಡಲಿಗೆ ಹಂಬಲಿಸಿದೇ ಮನ
ಕಾಣಬಲ್ಲೆನೆ ಒಂದು ದಿನ
ಕಡಲನು ಕೂಡಬಲ್ಲೆನೆ ಒಂದು ದಿನ?
ಕಾಣದ ಕಡಲಿದ ಮೊರೆತದ ಜೋಗುಳ
ಒಳಗಿವಿಗಿಂದು ಕೇಳುತಿದೆ
ನನ್ನ ಕಲ್ಪನೆಯು ತನ್ನ ಕಡಲನೇ
ಚಿತ್ರಿಸಿ ಚಿಂತಿಸಿ ಸುಯ್ಯುತಿದೆ
ಎಲ್ಲಿರುವುದೋ ಅದು
ಎಂತಿರುವುದೋ ಅದು
ನೋಡಬಲ್ಲೆನೆ ಒಂದು ದಿನ
ಕಡಲನು ಕೂಡಬಲ್ಲೆನೆ ಒಂದು ದಿನ?
ಸಾವಿರ ಹೊಳೆಗಳು ತುಂಬಿ ಹರಿದರು
ಒಂದೇ ಸಮನಾಗಿಹುದಂತೆ
ಸುನೀಲ ವಿಸ್ತರ ತರಂಗ ಶೋಭಿತ
ಗಂಭೀರಾಂಬುಧಿ ತಾನಂತೆ
ಮುನ್ನೀರಂತೆ
ಅಪಾರವಂತೆ
ಕಾಣಬಲ್ಲೆನೆ ಒಂದು ದಿನ
ಅದರೊಳು ಕರಗಲಾರನೆ ಒಂದು ದಿನ?
ಜಟಿಲ ಕಾನನದ ಕುಟಿಲ ಪಥಗಳಲಿ
ಹರಿವ ತೊರೆಯು ನಾನು
ಎಂದಿಗಾದರು ಕಾಣದ ಕಡಲಿಗೆ
ಸೇರಬಲ್ಲೆನೇನು
ಕಡಲೊಡಲಿನ ಆ ರತ್ನ ಗರ್ಭದಲಿ
ಮುಳುಗಬಹುದೆ ನಾನು
ಕಡಲ ನೀಲಿಯಲಿ
ಕರಗಬಹುದೆ ನಾನು
ಕಬ್ಬಿಗ/ನೆಗಳ್ಚು : ಜಿ ಎಸ್ ಶಿವರುದ್ರಪ್ಪ
ಕಬ್ಬಸಿವುಡಿ : ಚೆಲುವು- ಒಲವು
ಹಾಡಿದವರು: ಅಶ್ವತ್
ಈ ಹಾಡು ಕೇಳದೇ ಇರುವ ಕನ್ನಡಿಗರೇ ಇಲ್ಲವೇನೋ. ಹಾಡು ಕೇಳಿದಾಗಲೆಲ್ಲ, ಓದಿದಾಗಲೆಲ್ಲ ಬದುಕಿನ ಬಗ್ಗೆ ಏನೋ ಒಂದು ಹೊಸ ದಾರಿ ಕಂಡಂತೆ ಅನಿಸುತ್ತದೆ. ನೇರವಾದ ಚೆಲುವಾದ ಹಾಡು. ನಿಮ್ಮಂದಿಗೆ ಹಂಚಿಕೊಳ್ಳುವ ಹಂಬಲದಿಂದ ಇಲ್ಲಿ ಬರೆಯುತ್ತಿರುವೆ.
ವೇದಾಂತಿ ಹೇಳಿದನು
ಹೊನ್ನೆಲ್ಲ ಮಣ್ಣು
ಕವಿಯೊಬ್ಬ ಹಾಡಿದನು
ಮಣ್ಣೆಲ್ಲ ಹೊನ್ನು!
ವೇದಾಂತಿ ಹೇಳಿದನು
ಈ ಹೆಣ್ಣು ಮಾಹೆ
ಕವಿಯು ಕನವರಿಸಿದನು
ಓ ಇವಳೆನ್ನ ಚೆಲುವೆ
ಇವಳ ಜೊತೆಯಲಿ ನಾನು
ಸ್ವರ್ಗನೇ ಗೆಲುವೆ!
ವೇದಾಂತಿ ಹೇಳಿದನು
ಈ ಬದುಕು ಶೂನ್ಯ
ಕವಿ ನಿಂತು ಸಾರಿದನು
ಇದು ಅಲ್ಲ ಶೂನ್ಯ
ಜನ್ಮ ಜನ್ಮದಿ ಸವಿದೆ
ನಾನೆಷ್ಟು ಧನ್ಯ!
ಕಬ್ಬಿಗ/ನೆಗಳ್ಚು : ಜಿ ಎಸ್ ಶಿವರುದ್ರಪ್ಪ
ಕಬ್ಬಸಿವುಡಿ : ಕಾರ್ತೀಕ
ಹಾಡಿದವರು: ಪಿ.ಬಿ.ಶ್ರೀನಿವಾಸ